ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನನ್ನೂರಿನ ಋಣ ನನ್ನ ಮೇಲೆ ಯಾವಾಗಲೂ ಇದ್ದೇ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವುಕರಾಗಿ ಹೇಳಿದರು.
ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ನಾನು ಐದರಿಂದ ಏಳರವರೆಗೆ ಓದಿದ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ದತ್ತು ಪಡೆದಿದೆ. ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನೂತನ ಕಟ್ಟಡ ನಿರ್ಮಿಸಲಾಗಿದೆ. ಈ ಕಟ್ಟಡವನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ ಎಂದು ಅವರು ತಿಳಿಸಿದರು.
ನಮ್ಮೂರಿನಲ್ಲಿ ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳು ಇವೆ. ಪದವಿ ಕಾಲೇಜಿಗೆ ವಿದ್ಯಾರ್ಥಿಗಳು ದೊರೆಯುವುದಿಲ್ಲ ಎಂದು ಈವರೆಗೆ ಆರಂಭ ಮಾಡಿಲ್ಲ. ಆದರೆ ಊರಿನಲ್ಲಿ ಇತರೆ ಸೌಲಭ್ಯಗಳಾದ ಬಿಸಿಎಂ ವಿದ್ಯಾರ್ಥಿ ನಿಲಯ, ಪಶು ಚಿಕಿತ್ಸಾ ಕೇಂದ್ರ , ಗ್ರಂಥಾಲಯ, ಸಮುದಾಯ ಆರೋಗ್ಯ ಕೇಂದ್ರಗಳು ಇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

