ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತ ವೈಫಲ್ಯದಿಂದ ಬಿಕ್ಕಟ್ಟಿಗೆ ಸಿಲುಕಿದಾಗಲೆಲ್ಲಾ, ಜಾತಿ ಜನಗಣತಿಯನ್ನು ಪ್ರಸ್ತಾಪಿಸುತ್ತದೆ ಅದು ಸಾಮಾಜಿಕ ಕಾಳಜಿಯಿಂದಲ್ಲ, ಬದಲಾಗಿ ನಾಡಿನ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸದಾ ಸಂಚು ರೂಪಿಸುತ್ತಿರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದ್ದಾರೆ.
ಬೆಂಗಳೂರಿನ ದುರಂತದ ಕಾಲ್ತುಳಿತದ 11 ಅಮಾಯಕರ ಸಾವುಗಳಿಗೆ ರಾಜ್ಯವಷ್ಟೇ ಅಲ್ಲ ದೇಶವೇ ಮಮ್ಮಲ ಮರುಗುತ್ತಿದೆ. ಆದರೆ ಪ್ರಚಾರದ ಗೀಳಿಗೆ ಇಳಿದು ದೇಶದ ಜನಸಾಮಾನ್ಯರ ಆಕ್ರೋಶ ಎದುರಿಸುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಜನಗಣತಿಯನ್ನು ಪುನಃ ಪ್ರಸ್ತಾಪಿಸುವ ಮೂಲಕ ತನ್ನ ಹುಳುಕು ಮುಚ್ಚಿಕೊಳ್ಳಲು ಹೊರಟಿರುವುದು ನಿಜಕ್ಕೂ ದುರ್ದೈವದ ಸಂಗತಿ.
ಮರು ಜಾತಿಗಣತಿ ಮಾಡಲು ಹೊರಟಿರುವ ರಾಜ್ಯ ಸರ್ಕಾರ ಈಗಾಗಲೇ ಜಾತಿಗಣತಿಗಾಗಿ ಖರ್ಚು ಮಾಡಿರುವ 160 ಕೋಟಿ ಗೂ ಹೆಚ್ಚು ಹಣ ಸಂಪೂರ್ಣ ವ್ಯರ್ಥ ಎಂದು ಒಪ್ಪಿಕೊಳ್ಳುತ್ತಿದ್ದಾರೆಯೇ? ಉಪಮುಖ್ಯಮಂತ್ರಿಗಳ ಹೇಳಿಕೆಯಿಂದ ಈ ಸಂಗತಿ ಬಹಿರಂಗವಾದಂತಿದೆ. ಕಾಂಗ್ರೆಸ್ ಸರ್ಕಾರದ ಈ ಕುಟಿಲ ಬುದ್ದಿ, ಬೇಜವಾಬ್ದಾರಿತನ ಹಾಗೂ ಜನ ಪೀಡಕ ನಿಲುವುಗಳಿಗೆ ಜನರು ತಕ್ಕಪಾಠ ಕಲಿಸುವ ಕಾಲ ಸನ್ನಿಹಿತವಾಗಿದೆ ಎಂದು ವಿಜಯೇಂದ್ರ ಎಚ್ಚರಿಸಿದ್ದಾರೆ.