ಉತ್ತರಕ್ಕೆ ಪ್ರತ್ಯೇಕ ರಾಜ್ಯದ ಕೂಗು ಎಬ್ಬಿಸಿದ ಶಾಸಕ

News Desk

ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಬೆಳಗಾವಿ ಜಿಲ್ಲೆಯ ಶಾಸಕರೊಬ್ಬರು ಮಾಜಿ ಸಚಿವ ದಿ.ಉಮೇಶ ಕತ್ತಿ ಬಳಿಕ ಪ್ರತ್ಯೇಕ ಉತ್ತರ ಕರ್ನಾಟಕ ಕೂಗು ಎಬ್ಬಿಸಿದ್ದಾರೆ.

ಪ್ರತ್ಯೇಕ ಉತ್ತರ ಕರ್ನಾಟಕಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, ಪ್ರಾದೇಶಿಕ ಅಸಮಾನತೆ ವಿರುದ್ಧ ಹಿರಿಯ ರಾಜಕಾರಣಿ, ಕಾಗವಾಡ ಶಾಸಕ ರಾಜು ಕಾಗೆ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿ ಪತ್ರ ಬರೆದಿದ್ದಾರೆ.

- Advertisement - 

ದಕ್ಷಿಣ ಕರ್ನಾಟಕಕ್ಕೆ ಅಭಿವೃದ್ಧಿ ವಿಚಾರದಲ್ಲಿ ಹೋಲಿಸಿದರೆ ಉತ್ತರ ಕರ್ನಾಟಕ ಹಿಂದುಳಿದಿದೆ. ದಕ್ಷಿಣಕ್ಕೆ ತೋರಿಸುವ ವಿಶೇಷ ಕಾಳಜಿ ಉತ್ತರಕ್ಕೆ ಯಾಕಿಲ್ಲ?. ಎಲ್ಲರೂ ಕನ್ನಡನಾಡಿನ ಮಕ್ಕಳೇ, ಆದರೂ ಯಾಕೆ ಮಲತಾಯಿ ಧೋರಣೆ?. ತಾರತಮ್ಯ ಹೋಗಲಾಡಿಸಿ, ಇಲ್ಲವೇ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ರಚನೆ ಮಾಡುವಂತೆ ಈ ಭಾಗದ ಕೆಲ ಹೋರಾಟಗಾರರು ಆಗ್ರಹಿಸುತ್ತಿದ್ದಾರೆ. ದಿ.ಉಮೇಶ ಕತ್ತಿ ಅವರು ಕೂಡ ಈ ವಿಚಾರದಲ್ಲಿ ಧ್ವನಿ ಎತ್ತಿದ್ದರು. ಅಲ್ಲದೇ ಉತ್ತರ ಕರ್ನಾಟಕ ವಿಕಾಸ ವೇದಿಕೆಯಡಿ ಈಗಲೂ ಹೋರಾಟ ಮುಂದುವರಿದಿದೆ.

ಶಾಸಕ ರಾಜು ಕಾಗೆ ಕೂಡ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಆಗಲೇಬೇಕು ಅಂತಾ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

- Advertisement - 

ಪತ್ರದಲ್ಲಿ ಏನಿದೆ?:
ಉತ್ತರ ಕರ್ನಾಟಕದ
15 ಜಿಲ್ಲೆಗಳಾದ ಬೀದರ, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಉತ್ತರಕನ್ನಡ, ಹಾವೇರಿ, ವಿಜಯನಗರ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳನ್ನೊಳಗೊಂಡು ಆಡಳಿತಾತ್ಮಕ ಅನುಕೂಲಕ್ಕಾಗಿ ಮತ್ತು ಸಮಗ್ರ ಅಭಿವೃದ್ಧಿಗಾಗಿ ಹೊಸ ರಾಜ್ಯ ರಚನೆಗೆ ನನ್ನ ಆಗ್ರಹವಿದೆ.

ಕರ್ನಾಟಕ ಏಕೀಕರಣ ಆದಾಗಿನಿಂದ ಇಲ್ಲಿಯವರೆಗೂ ಎಲ್ಲ ಕ್ಷೇತ್ರಗಳಲ್ಲಿಯೂ ಈ ಭಾಗಕ್ಕೆ ನಿರಂತರವಾಗಿ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ಆಗುತ್ತಲೆ ಬಂದಿದೆ.

ಪ್ರತ್ಯೇಕ ರಾಜ್ಯ ರಚನೆಯಿಂದ ಮತ್ತೊಂದು ಕನ್ನಡ ನಾಡು ಉದಯವಾಗುವುದು ನಮಗೆ ಹೆಮ್ಮೆಯ ವಿಷಯ. ಸರ್ವತೋಮುಖ ಅಭಿವೃದ್ಧಿಗೆ ಪ್ರತ್ಯೇಕ ರಾಜ್ಯ ಕೇಳುತ್ತಿದ್ದೇವೆ.

ಉತ್ತರ ಕರ್ನಾಟಕವು ಸರ್ವ ಸಂಪನ್ಮೂಲಗಳನ್ನು ಹೊಂದಿರುವ ಸಮೃದ್ಧ ನಾಡಾಗಿದೆ. ಕನ್ನಡ ಭಾಷೆಯ ಉಳಿವಿಗೆ ಮತ್ತು ಕರ್ನಾಟಕ ಏಕೀಕರಣಕ್ಕೆ ವಿಶೇಷ ಕೊಡುಗೆ ಕೊಟ್ಟ ನಾಡು ನಮ್ಮದು. ಉತ್ತರ ಕರ್ನಾಟಕ ಹೋರಾಟ ಸಮಿತಿಯ ಜನಪ್ರತಿನಿಧಿ ಸಹಿ ಸಂಗ್ರಹಣಾ ಅಭಿಯಾನಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಶಾಸಕರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈಗಾಗಲೇ, ಒಂದು ಕೋಟಿಗೂ ಅಧಿಕ ಜನರಿಂದ ಸಹಿಯೊಂದಿಗೆ ಲಿಖಿತ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಮತ್ತು ಗೌರವಾನ್ವಿತ ರಾಜ್ಯಪಾಲರಿಗೆ ಮತ್ತು ಗೌರವಾನ್ವಿತ ರಾಷ್ಟ್ರಪತಿಯವರಿಗೆ ಭೇಟಿಯಾಗಿ ಮನವಿಪತ್ರ ಸಲ್ಲಿಸಿದ್ದಾರೆ. ಅದೇ ರೀತಿ ಪ್ರಧಾನಿಗಳಿಗೆ ಪತ್ರ ಬರೆದಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಈ ಭಾಗದ ಎಲ್ಲ ವರ್ಗದ ಜನರ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರತ್ಯೇಕ ರಾಜ್ಯ ಕೇಳುತ್ತಿದ್ದಾರೆ. ದಯವಿಟ್ಟು ತಾವು ನಮ್ಮ ಮನವಿ ಪರಿಗಣಿಸಿ, ಕೇಂದ್ರ ಸರ್ಕಾರಕ್ಕೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ನಿರ್ಮಾಣಕ್ಕಾಗಿ ಸೂಕ್ತ ಶಿಫಾರಸು ಮಾಡಬೇಕೆಂದು ಶಾಸಕರು ಬರೆದಿರುವ ಪತ್ರದಲ್ಲಿ ವಿನಂತಿಸಿದ್ದಾರೆ.

ನೇತೃತ್ವ ವಹಿಸುವೆ:
ಶಾಸಕ ರಾಜು ಕಾಗೆ ಅವರು ಮಾಧ್ಯಮಗಳ ಜೊತೆ ಮಾತನಾಡಿ
, ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಸುದೀರ್ಘವಾಗಿ ವಿಷಯ ಪ್ರಸ್ತಾಪಿಸುತ್ತೇನೆ. ಉತ್ತರ ಕರ್ನಾಟಕ ಪ್ರತ್ಯೇಕ ಆಗಬೇಕು ಎಂಬ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ಆ ಹೋರಾಟದ ನೇತೃತ್ವವನ್ನು ನಾನೇ ವಹಿಸಿಕೊಳ್ಳುವೆ ಮತ್ತು ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂಘಟನೆ ಮಾಡುತ್ತೇನೆ. ನನ್ನ ಜೊತೆಗೆ ಉತ್ತರ ಕರ್ನಾಟಕದ ಎಲ್ಲ ಶಾಸಕರು ಮತ್ತು ಜನರು ಇದ್ದಾರೆ ಎಂದು ಅವರು ತಿಳಿಸಿದ್ದಾರೆ.

 

 

 

Share This Article
error: Content is protected !!
";