ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಬ್ಬು ಬೆಳೆಗಾರರ ಸಂಕಷ್ಟ ಬಿಗಡಾಯಿಸಿದೆ. ಮುದೋಳದ ಸಕ್ಕರೆ ಕಾರ್ಖಾನೆಯ ಯಾರ್ಡ್ʼನಲ್ಲಿ ನಿಂತಿದ್ದ ಕಬ್ಬು ತುಂಬಿದ್ದ ಟ್ರಾಕ್ಟರುಗಳು ಬೆಂಕಿಗೆ ಆಹುತಿ ಆಗಿರುವುದು ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಕರ್ನಾಟಕ ಕಾಂಗ್ರೆಸ್ ಸರಕಾರದ ವೈಫಲ್ಯಕ್ಕೆ ಇದು ಸ್ಪಷ್ಟ ನಿದರ್ಶನ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಟೀಕಾಪ್ರಹಾರ ಮಾಡಿದರು.
ಬೆಳಗಾವಿಯಲ್ಲಿ ರೈತರು ಹೋರಾಟಕ್ಕಿಳಿದಾಗ ಆ ಕ್ಷಣಕ್ಕೇನೋ ಅವರ ಮೂಗಿಗೆ ತುಪ್ಪ ಸವರಿದ ಸರಕಾರವು, ಇಡೀ ಕಬ್ಬು ಬೆಳೆಗಾರರ ಬಿಕ್ಕಟ್ಟನ್ನು ನಿರ್ವಹಿಸುವಲ್ಲಿ ಘೋರ ವೈಫಲ್ಯ ಕಂಡಿತು. ಅದರ ಪರಿಣಾಮವೇ ಮುಧೋಳದಲ್ಲಿ ರೈತರ ತಾಳ್ಮೆಯ ಕಟ್ಟೆಯೊಡೆಯುಂತೆ ಮಾಡಿದೆ ಎಂದು ಕುಮಾರಸ್ವಾಮಿ ತಿಳಿಸಿದರು.
ಅಕ್ಕಿ ಮೇಲೆ ಆಸೆ, ನೆಂಟರ ಮೇಲೆ ಪ್ರೀತಿ ಅನ್ನುವ ಲಾಭಕೋರ ಧೋರಣೆಯನ್ನು ಸರಕಾರ ಬಿಡಬೇಕು. ರೈತರ ಸಂಕಷ್ಟವನ್ನು ಅಧಿಕಾರದ ಅಮುಲುಗಣ್ಣಿನಿಂದ ನೋಡಬಾರದು. ಹೃದಯ ವೈಶಾಲ್ಯದಿಂದ ಕಾಣುವ ಔದಾರ್ಯ ತೋರಬೇಕು. ಮುಧೋಳದ ರೈತರ ಜತೆ ನಾನೂ ಇದ್ದೇನೆ ಎಂದು ಕುಮಾರಸ್ವಾಮಿ ಭರವಸೆ ನೀಡಿದರು.
ರಾಜ್ಯ ಸರಕಾರ ತಕ್ಷಣವೇ ಮಧ್ಯಪ್ರವೇಶಿಸಿ ಬಿಕ್ಕಟ್ಟನ್ನು ತಿಳಿಗೊಳಿಸಬೇಕು. ಕಬ್ಬು ಬೆಳೆಗಾರರ ಸಂಕಷ್ಟ ಮತ್ತೆ ಸೃಷ್ಟಿಯಾಗದಂತೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಸರಕಾರವನ್ನು ಆಗ್ರಹಿಸಿದ್ದಾರೆ.

