ಬಿಸಿಯೂಟ ತಯಾರಿಕರ ಕಾರ್ಯ ಬಹು ಶ್ರೇಷ್ಠ: ಶಾಸಕ ಟಿ.ರಘುಮೂರ್ತಿ

News Desk

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ತಾಲ್ಲೂಕಿನಾದ್ಯಂತ ಕಳೆದ ಹಲವಾರು ವರ್ಷಗಳಿಂದ ರಾಜ್ಯ ಸರ್ಕಾರ ಪ್ರತಿನಿತ್ಯ ಶಾಲೆಗೆ ಕಲಿಯಲು ಬರುವ ಎಲ್ಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟವನ್ನು ನೀಡುವ ಮೂಲಕ ಅವರ ಹಸಿವನ್ನು ತಣಿಸುತ್ತಾ ಬಂದಿದೆ. ಅಕ್ಷರಜ್ಞಾನದ ಜೊತೆಗೆ ಅನ್ನದಾಸೋಹವನ್ನು ನೀಡುವ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಯಶಸ್ವಿಯಾಗಿ ಮಾಡುತ್ತಿದೆ ಎಂದು ಕ್ಷೇತ್ರದ ಶಾಸಕ
, ಸಣ್ಣ ಕೈಗಾರಿಕೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

- Advertisement - 

ಅವರು, ಭಾನುವಾರ ನಗರದ ಸ್ವಾಮಿವಿವೇಕಾನಂದ ಪ್ರೌಢಶಾಲಾ ಆವರಣದಲ್ಲಿ ತಾಲ್ಲೂಕು ಮಟ್ಟದ ಬಿಸಿಯೂಟ ಮುಖ್ಯ ಹಾಗೂ ಸಹಾಯಕ ಅಡುಗೆ ತಯಾರಿಕರಿಗೆ ಏರ್ಪಡಿಸಿದ್ದ ಒಂದು ದಿನದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಕಳೆದ ಹಲವಾರು ದಶಕಗಳಿಂದ ಬಿಸಿಯೂಟ ತಯಾರಕರು ಸೇವಾ ಭದ್ರತೆ ಸೇರಿದಂತೆ ಹಲವಾರು ಭೇಡಿಕೆ ಈಡೇರಿಸುವಂತೆ ಸರ್ಕರದ ಮೇಲೆ ನಿರಂತರವಾಗಿ ಒತ್ತಡ ಹೇರುತ್ತಾ ಬಂದಿದ್ಧಾರೆ. ಎಐಟಿಯುಸಿ ನೇತೃತ್ವದ ಸಂಘಟನೆ ಇದರ ಜವಾಬ್ದಾರಿ ಹೊತ್ತಿದೆ. ನಾನು ಸಹ ಬಿಸಿಯೂಟ ತಯಾರಿಕರ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರುವ ಭರವಸೆ ನೀಡಿದರು. ಈ ಬಾರಿಯ ಆಯವ್ಯಯ ಮಂಡನೆ ಸಂದರ್ಭದಲ್ಲಿ ನಿಮ್ಮ ಬೇಡಿಕೆಗಳ ಈಡೇರಿಕೆ ಬಗ್ಗೆ ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದರು.

- Advertisement - 

ಪ್ರಾಸ್ತಾವಿಕವಾಗಿ ಮಾತನಾಡಿದ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ, ಪ್ರಧಾನಮಂತ್ರಿ ಪೋಷಣ್‌ ಶಕ್ತಿ ನಿರ್ಮಾಣ ಮಧ್ಯಾಹ್ನ ಉಪಹಾರ ಯೋಜನೆ, ಶಾಲಾ ಶಿಕ್ಷಣ ಇಲಾಖೆ, ತಾಲ್ಲೂಕು ಪಂಚಾಯಿತಿ ಸಹಯೋಗದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಂಡಿದೆ. ಪ್ರತಿವರ್ಷವೂ ಕ್ಷೇತ್ರದ ಶಾಸಕರ ಮಾರ್ಗದರ್ಶನದಲ್ಲಿ ಮುಖ್ಯ ಮತ್ತು ಸಹಾಯಕ ಅಡುಗೆ ತಯಾರಿಕರಿಗೆ ಒಂದು ದಿನದ ತರಬೇತಿ ನೀಡಿ ಅವರು ನಿರ್ವಹಿಸುವ ಜವಾಬ್ದಾರಿ ಕುರಿತು ಜಾಗೃತಿ ಮೂಡಿಸಲಾಗುವುದು. ಪ್ರತಿಯೊಬ್ಬಮುಖ್ಯ ಮತ್ತು ಅಡುಗೆ ಸಹಾಯಕ ಜವಾಬ್ದಾರಿಗೆ ಗೌರವಿದೆ. ಕಾರಣ ಪ್ರತಿನಿತ್ಯವೂ ಮಕ್ಕಳಿಗೆ ಗುಣಮಟ್ಟದ ಆಹಾರವನ್ನು ಸರಿಯಾದ ಸಮಯಕ್ಕೆ ನೀಡಬೇಕಿದೆ, ತಾಲ್ಲೂಕಿನಾದ್ಯಂತ ಒಟ್ಟು ೪೪೬ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮ ನಡೆಯುತ್ತಿದೆ. ೪೩೯ ಮುಖ್ಯ ಅಡುಗೆ ತಯಾರಿಕರು, ೫೪೯ ಸಹಾಯಕ ಅಡುಗೆ ತಯಾರಕರು, ಒಟ್ಟು ೯೯೩ ಅಡುಗೆ ತಯಾರಿಕರು ತಾಲ್ಲೂಕಿನಾದ್ಯಂತ ಕಾರ್ಯನಿರ್ವಹಿಸುತ್ತಿದ್ಧಾರೆಂದರು.

ಎಐಟಿಯುಸಿ ರಾಜ್ಯ ಸಂಘಟನಾ ಕಾರ್ಯದರ್ಶಿ ಸಿ.ವೈ.ಶಿವರುದ್ರಪ್ಪ ಮಾತನಾಡಿ, ಪ್ರತಿನಿತ್ಯ ಮುಗ್ದ ಮಕ್ಕಳ ಹಸಿವನ್ನು ನೀಗಿಸುವ ಕಾರ್ಯವನ್ನು ಉತ್ತಮವಾಗಿ ಅಡುಗೆ ತಯಾರಿಸಿ ನೀಡುವ ಬಿಸಿಯೂಟ ತಯಾರಿಕೆ ಸಮಸ್ಯೆಗಳ ನಿವಾರಣೆಗೆ ಸರ್ಕಾರ ನಿರ್ಲಕ್ಷ್ಯೆ ವಹಿಸಿರುವುದು ಸರಿಯಲ್ಲವೆಂದರು. ಜಿಲ್ಲಾ ಸಂಚಾಲಕ ದೊಡ್ಡ ಉಳ್ಳಾರ್ತಿ ಕರಿಯಣ್ಣ, ಸರ್ಕಾರದ ನಿಲುವನ್ನು ಖಂಡಿಸಿದರು.

- Advertisement - 

ಕಾರ್ಯಕ್ರಮದಲ್ಲಿ  ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಶಶಿಧರ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್, ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆ ತಿಪ್ಫೇಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

 

 

 

Share This Article
error: Content is protected !!
";