ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಡು ಮುಟ್ಟದ ಸೊಪ್ಪಿಲ್ಲ, ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಜೇಬಿಗೆ ಕನ್ನ ಹಾಕದ ದಿನವಿಲ್ಲ ಎಂದು ನೋಂದಣಿ ಶುಲ್ಕ ಏರಿಕೆಗೆ ಪ್ರತಿ ಪಕ್ಷದ ನಾಯಕ ಆರ್. ಅಶೋಕ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನೀರು, ಹಾಲು, ಪೆಟ್ರೋಲ್, ಡಿಸೇಲ್, ಕರೆಂಟು, ಬಸ್ಸು, ಮೆಟ್ರೋ, ಆಸ್ತಿ ತೆರಿಗೆ, ಜನನ ಮರಣ ಪ್ರಮಾಣ ಪತ್ರದ ಶುಲ್ಕ ಸೇರಿ ಎಲ್ಲಾ ವಸ್ತು/ಸೇವೆಗಳ ಬೆಲೆಯನ್ನು ಈಗಾಗಲೇ ಮನಬಂದಂತೆ ಏರಿಸಿರುವ ರಾಜ್ಯ ಸರ್ಕಾರದ ವಕ್ರ ದೃಷ್ಟಿ ಈಗ ಆಸ್ತಿ ನೋಂದಣಿ ಶುಲ್ಕದ ಮೇಲೆ ಬಿದ್ದಿದೆ ಎಂದು ಅಶೋಕ್ ವಾಗ್ದಾಳಿ ಮಾಡಿದ್ದಾರೆ.
ಆಸ್ತಿ ನೋಂದಣಿ ಶುಲ್ಕವನ್ನು ಏಕಾಏಕಿ ಶೇ.100 ರಷ್ಟು ಏರಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ತನ್ನ ಜನವಿರೋಧಿ ನೀತಿಯನ್ನು ನಿರ್ಲಜ್ಜವಾಗಿ ಪ್ರದರ್ಶಿಸಿದೆ ಎಂದು ಅಶೋಕ್ ಕಿಡಿಕಾರಿದ್ದಾರೆ.
ಸಿಎಂ ಸಿದ್ದರಾಮಯ್ಯ ನವರೇ, ಬೆಲೆಯೇರಿಕೆಯೇ ನಿಮ್ಮ ಅಸಲಿ ಗ್ಯಾರೆಂಟಿ ಆಗಿದೆಯಾ? ಜೀವನವೆಲ್ಲ ಕಷ್ಟಪಟ್ಟು ಸಾಲ ಸೋಲ ಮಾಡಿ ಕುಟುಂಬಕ್ಕೆ ಒಂದು ಸ್ವಂತ ಗೂಡು ಮಾಡಿಕೊಳ್ಳಲು ಚಿಕ್ಕ ನಿವೇಶವವನ್ನೋ, ಫ್ಲಾಟ್ ಅನ್ನೋ ಖರೀದಿ ಮಾಡಲು ಹೊರಟರೆ ಅದಕ್ಕೆ 7.6% ನೋಂದಣಿ ಮತ್ತು ಮುದ್ರಾಂಕ ಶುಲ್ಕ ಭರಿಸಬೇಕು ಅಂದರೆ ಬಡವರು, ಮಧ್ಯಮ ವರ್ಗದ ಜನ ಸ್ವಂತ ಸೂರು ಮಾಡಿಕೊಳ್ಳುವಾದರೂ ಹೇಗೆ? ಎಂದು ಅವರು ಪ್ರಶ್ನೆ ಮಾಡಿದ್ದಾರೆ.
ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿ ಇಲ್ಲ, ಕರ್ನಾಟಕಕ್ಕೆ ಉಳಿಗಾಲವಿಲ್ಲ ಎಂದು ಕಿಡಿಕಾರಿದ್ದಾರೆ.

