ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ಆಗಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸ್ಪಷ್ಟವಾಗಿ ತಿಳಿಸಿದರು.
ಬೆಂಗಳೂರಿನ ಸದಾಶಿವನಗರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ನಂತರ ಮಾತನಾಡಿದ ಸುರ್ಜೇವಾಲಾ, ಯಾರೂ ಪಕ್ಷದ ಚೌಕಟ್ಟು ಮೀರಬಾರದು ಅಂತಾ ಸೂಚನೆ ಕೊಟ್ಟಿದ್ದರೂ ಕೆಲವರು ಅದನ್ನು ಮೀರಿ ಮಾತನಾಡಿದ್ದಾರೆ. ಈ ಬಗ್ಗೆ ಗಮನ ಹರಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಸೂಚನೆ ನೀಡಿದ್ದೇನೆ ಎಂದು ಸುರ್ಜೇವಾಲಾ ತಿಳಿಸಿದ್ದಾರೆ.
ಸುರ್ಜೇವಾಲಾ ಮುಂದುವರೆದು ಮಾತನಾಡಿ, ಮಹದೇವಪುರ ಮತ್ತು ಆಳಂದ ಕ್ಷೇತ್ರಕ್ಕೆ ಮತಗಳ್ಳತನ ಸೀಮಿತವಾಗಿಲ್ಲ. ಬೇರೆ ಬೇರೆ ಕ್ಷೇತ್ರಗಳಲ್ಲೂ ನಡೆದಿದೆ. ವಿಪಕ್ಷ ನಾಯಕ ರಾಹುಲ್ ಗಾಂಧಿ ಮಹಾರಾಷ್ಟ್ರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ದಾಖಲೆ ಬಿಡುಗಡೆ ಮಾಡಿದ್ದಾರೆ. ಬಿಜೆಪಿ ಸಂವಿಧಾನ ನೀಡಿದ ಹಕ್ಕು ಕಿತ್ತುಕೊಳ್ತಿರುವ ಕಾರಣ ಕಾಂಗ್ರೆಸ್ ವೋಟ್ ಚೋರಿ ಅಭಿಯಾನ ನಡೆಸುತ್ತಿದೆ ಎಂದು ಸುರ್ಜೇವಾಲ ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್ ವತಿಯಿಂದಲೂ ಬೆಂಗಳೂರಿನ ಪುಲಕೇಶಿ ನಗರದಲ್ಲಿ ವೋಟ್ ಚೋರಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.
ಖರ್ಗೆ ಆರೋಗ್ಯ ವಿಚಾರಿಸಿದ ಸುರ್ಜೇವಾಲಾ-
ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸಕ್ಕೆ ರಣದೀಪ್ ಸುರ್ಜೇವಾಲಾ ಭೇಟಿ ನೀಡಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್ಮೇಕರ್ ಅಳವಡಿಸಲಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಕೂಡ ಉಪಸ್ಥಿತರಿದ್ದರು.

