ಚಂದ್ರವಳ್ಳಿ ನ್ಯೂಸ್, ತುಮಕೂರು:
ನವದೆಹಲಿಯ ಕರ್ನಾಟಕ ಸಂಘದಲ್ಲಿ ಆಯೋಜಿಸಿದ್ದ ೬೯ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯ ರೈಲ್ವೆ ಮತ್ತು ಜಲ ಶಕ್ತಿ ಸಚಿವ ವಿ. ಸೋಮಣ್ಣ ಭಾಗವಹಿಸಿ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿದರು.
ನಂತರ ಮಾತನಾಡಿದ ಅವರು, ದೇಶದ ರಾಜಧಾನಿ ನವದೆಹಲಿಯಲ್ಲಿ ತಾಯಿ ಕನ್ನಡಾಂಬೆಯ ಪೂಜೆ ಮತ್ತು ಧ್ವಜಾರೋಹಣ ನೆರವೇರಿಸುವ ಸದಾವಕಾಶ ನನಗೆ ಲಭ್ಯವಾಗಿದೆಯೆಂದು ಅವರು ಹರ್ಷ ವ್ಯಕ್ತ ಪಡಿಸಿದರು.
ದೆಹಲಿ ಕರ್ನಾಟಕ ಸಂಘದಲ್ಲಿ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದ್ದ ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷರು ಹಾಗೂ ಇತರ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ, ಇನ್ನು ಮುಂದೆಯೂ ಕನ್ನಡ ಪರ ಹತ್ತಾರು ಕಾರ್ಯಕ್ರಮಗಳನ್ನು ವಿಶೇಷ ರೀತಿಯಿಂದ ಆಯೋಜಿಸುವಂತೆ ಸಲಹೆ ನೀಡಿದರು.
ಕರ್ನಾಟಕ ಏಕೀಕರಣಕ್ಕೆ ಹೋರಾಡಿದ ಮಹನೀಯರ ವ್ಯಕ್ತಿತ್ವವನ್ನು ರಾಷ್ಟ್ರ ಮಟ್ಟದಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ಅವರ ಬಗ್ಗೆ ಇಂಗ್ಲೀಷ್ ಮತ್ತು ಹಿಂದಿ ಭಾಷೆಗಳಲ್ಲಿ ಪ್ರಕಟಣೆಗಳನ್ನು ಹೊರತರುವಂತೆ ಸಲಹೆ ನೀಡಿದರು. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕನ್ನಡ ಮತ್ತು ಕನ್ನಡ ಸಂಘಟನೆಗಳ ಅಸ್ತಿತ್ವವನ್ನು ಕಾಯ್ದುಕೊಳ್ಳಲು ದೆಹಲಿ ಕನ್ನಡಿಗರೆಲ್ಲರೂ ಸಮಾನ ಮನಸ್ಸಿನಿಂದ ಒಗಟ್ಟಾಗಿ ಕೆಲಸ ಮಾಡಬೇಕೆಂದು ಕರೆ ನೀಡಿದರು.
ಈ ಸುಸಂದರ್ಭದಲ್ಲಿ ಸಮಸ್ತ ಕರ್ನಾಟಕದ ಜನತೆಗೆ ೬೯ನೇ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬದ ಶುಭಾಶಯವನ್ನು ಕೋರಿದರು.