ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಕ್ರೋ ಫೈನಾನ್ಸ್ ಹಾವಳಿ ಹಾಗೂ ವಸೂಲಾತಿ ದೌರ್ಜನ್ಯದಿಂದ ಸಾಲಗಾರ ಬಡವರು ತತ್ತರಿಸಿದ್ದು ಅದರಲ್ಲೂ ಗ್ರಾಮೀಣ ಪ್ರದೇಶದ ಬಡ ಜನರು, ಕೃಷಿಕರು, ಸಣ್ಣ ಹಿಡುವಳಿದಾರ ರೈತರು, ಶ್ರಮಿಕ ವರ್ಗದವರು, ಬೀದಿ ಬದಿ ವ್ಯಾಪಾರಿಗಳನ್ನು ಗುರಿಯನ್ನಾಗಿಸಿಕೊಂಡು ಸಾಲ ವಿತರಿಸಲಾಗುತ್ತಿದ್ದು ಇವರೆಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆತಂಕ ವ್ಯಕ್ತಪಡಿಸಿದ್ದಾರೆ.
ಆರ್ಬಿಐ ನಿಯಮಗಳನ್ನು ಗಾಳಿಗೆ ತೂರಿ ಮೀಟರ್ ಬಡ್ಡಿ ದಂಧೆಕೋರರನ್ನು ಹತ್ತಿಕ್ಕುವ ರೀತಿಯಲ್ಲಿ ಮೈಕ್ರೋ ಫೈನಾನ್ಸ್ ಜಾಲ ಸಾಲಗಾರರ ಪ್ರಾಣ ಹಿಂಡಿ ವಸೂಲಾತಿಗೆ ನಿಂತಿರುವುದು ಬಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮರ್ಯಾದೆಗೆ ಅಂಜಿ ಗ್ರಾಮೀಣ ಪ್ರದೇಶದ ಬಡವರು ಮನೆ ತೊರೆದು ಹೋಗುತ್ತಿದ್ದಾರೆ. ಇವರ ರಕ್ಷಣೆಗೆ ಸರ್ಕಾರ ಜರೂರು ಕ್ರಮ ಕೈಗೊಳ್ಳಬೇಕಿದೆ. ಕಾನೂನು ಹಾಗೂ ಗೃಹ ಇಲಾಖೆ ಈ ಸಂಬಂಧವಾಗಿ ನಿಯಮಾವಳಿಗಳನ್ನು ಉಲ್ಲಂಘಿಸಿ ವಸೂಲಾತಿಗಿಳಿದು ಗುಂಡಾಗಿರಿ ಪ್ರದರ್ಶಿಸುತ್ತಿರುವ ಮೈಕ್ರೋ ಫೈನಾನ್ಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಬೇಕಿದೆ ಎಂದು ವಿಜಯೇಂದ್ರ ಆಗ್ರಹ ಮಾಡಿದ್ದಾರೆ.
ಎಷ್ಟು ಬಿಟ್ಟಿ ಭಾಗ್ಯಗಳನ್ನು ನೀಡಿದರೇನು? ಬಡವರನ್ನು ಮೈಕ್ರೋ ಫೈನಾನ್ಸ್ ನಂತಹ ಜಾಲದ ವ್ಯೂಹಕ್ಕೆ ಬಡವರು ಸಿಲುಕಿಕೊಂಡು ನರಳುತ್ತಿರುವ ಪರಿಸ್ಥಿತಿ ಉದ್ಭವಿಸಿರುವುದು ವಿಪರ್ಯಾಸದ ಸಂಗತಿಯಾಗಿದೆ. ಸಾಮಾಜಿಕ ಅಭದ್ರತೆಯಿಂದ ಹಾಗೂ ಶೇ 25% ಕ್ಕೂ ಹೆಚ್ಚು ಬಡ್ಡಿ ವಿಧಿಸಿ ಸಕಾಲದಲ್ಲಿ ಕಂತು ಪಾವತಿಸಲು ಸಾಧ್ಯವಾಗದವರ ಮೇಲೆ ಇನ್ನಷ್ಟು ಶುಲ್ಕಗಳನ್ನು ವಿಧಿಸಿ ಇದ್ದಬದ್ದ ಆಸ್ತಿಯನ್ನೆಲ್ಲ ಮಾರಿಕೊಳ್ಳುವ ಪರಿಸ್ಥಿತಿಯು ಈ ಮೈಕ್ರೋಫೈನಾನ್ಸ್ ಸಾಲ ನೀಡುವ ಜಾಲದಿಂದ ಉದ್ಭವಿಸಿದೆ ಎಂದು ಅವರು ಹರಿಹಾಯ್ದಿದ್ದಾರೆ.
ಇಡೀ ರಾಜ್ಯದ್ಯಂತ ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಸಾವಿರಾರು ಶಾಖೆಗಳು ತನ್ನ ಜಾಲಗಳನ್ನು ವಿಸ್ತರಿಸಿ ಅಮಾಯಕರು, ಕನಿಷ್ಠ ಆದಾಯದಿಂದ ಬದುಕುವವರನ್ನು ಆಯ್ದುಕೊಂಡು ಸಾಲ ನೀಡುವ ಮೂಲಕ ಅವರು ಸಾಲ ತೀರಿಸುವ ವ್ಯೂಹದಿಂದ ಹೊರಬರಲಾಗದ ಪರಿಸ್ಥಿತಿ ನಿರ್ಮಾಣ ಮಾಡಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು ದರೋಡೆಕೋರರು ಬೀದಿಗಿಳಿದು ಹಾಡು ಹಗಲೇ ಬ್ಯಾಂಕು ಲೂಟಿಯಲ್ಲಿ ತೊಡಗಿದ್ದಾರೆ.
ರಾಜಾರೋಷವಾಗಿ ಪ್ರಯಾಣಿಕರಂತೆ ಬ್ಯಾಗುಗಳಲ್ಲಿ ಹಣ ಒಡವೆ ತುಂಬಿಕೊಂಡು ಪರಾರಿಯಾಗುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸಾಲದ ಶೂಲಕ್ಕೆ ಸಿಲುಕಿರುವ ಅಮಾಯಕರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಸರ್ಕಾರದ ರಕ್ಷಣೆ ಸಿಗುತ್ತದೆ ಎಂದು ಜನರು ನಂಬಿಕೊಳ್ಳಲು ಹೇಗೆ ಸಾಧ್ಯ? ಇಂತವರಿಗೆ ಪೊಲೀಸ್ ಠಾಣೆಯ ಮೆಟ್ಟಿಲು ಹತ್ತುವ ಧೈರ್ಯ ಮೊದಲೇ ಇರುವುದಿಲ್ಲ, ಇನ್ನು ಪೊಲೀಸ್ ರಕ್ಷಣೆಗೆ ದೂರು ನೀಡಿದರೂ ಅದನ್ನು ಗಂಭೀರವಾಗಿ ಸ್ವೀಕರಿಸುವ ಮನೋಭಾವ ಪ್ರದರ್ಶಿಸಲಾಗುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದೆ ಎಂದು ಅವರು ತಿಳಿಸಿದ್ದಾರೆ.
“ಜನರಿಗೆ ಮಾನ-ಪ್ರಾಣದ ರಕ್ಷಣೆಯ ಭಾಗ್ಯ ಕಲ್ಪಿಸಲಾಗದಿದ್ದರೆ ಸರ್ಕಾರ ಯಾವ ಭಾಗ್ಯ ಕೊಟ್ಟರೂ ಅದು ನಿರರ್ಥಕ ಎಂಬ ಅರಿವು ಸರ್ಕಾರಕ್ಕಿರಬೇಕು”. ಬಡವರ ರಕ್ಷಣೆಗೆ ಈ ಕೂಡಲೇ ಸರ್ಕಾರ ಧಾವಿಸಿ ಬರಲಿ, ಮೈಕ್ರೋ ಫೈನಾನ್ಸ್ ಜಾಲದ ದೌರ್ಜನ್ಯಗಳನ್ನು ಹತ್ತಿಕಲು ಸಾಧ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಂಡು ಅಮಾಯಕರ ರಕ್ಷಣೆಗೆ ನಾವಿದ್ದೇವೆ ಎಂಬ ಅಭಯವನ್ನಾದರೂ ನೀಡಲಿ ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.

